ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಸಂಭ್ರಮಾಚರಣೆ ನೋಡಲು ಅಪಾರ ಸಂಖ್ಯೆಯಲ್ಲಿ ಜನಸಾಗರವೇ ಆಗಮಿಸಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಸದ್ಯದ ಮಾಹಿತಿಯ ಪ್ರಕಾರ 11 ಮಂದಿ ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಸರ್ಕಾರದ ಬೇಜವಾಬ್ದಾರಿ ಎದ್ದು ಕಾಣುತ್ತಿದ್ದು, ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆ ಸರಿಯಾಗಿ ಮಾಡಿಕೊಳ್ಳದೇ ಕಾರ್ಯಕ್ರಮ ನಡೆಸಿರುವುದು ಈ ದುರಂತಕ್ಕೆ ನೇರ ಕಾರಣ ಎನ್ನಲಾಗುತ್ತಿದೆ.
ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಆರಕ್ಕೂ ಹೆಚ್ಚು ಆರ್ ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆ, ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೂ ದಾಖಲಿಸಲಾಗಿದೆ. 1೦ ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬ್ಯಾರಿಕೇಡ್ ಬಿದ್ದು ಮೂವರ ಕಾಲು ಮುರಿದಿದೆ. ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.
RCB ಸಂಭ್ರಮಾಚರಣೆಯಲ್ಲಿ 11 ಮಂದಿ ಸಾವು
