ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ (KGMOA) ಕೇಂದ್ರ ಸಮಿತಿಯು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡಲು ನಿರ್ಧರಿಸಿದೆ.
ಇಂದು ಸರ್ಕಾರದ ಪರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್. ಸಿ.ಮಹದೇವಪ್ಪ ನೇತೃತ್ವ ಕೆ.ಜಿ.ಎಂ.ಒ.ಎ ಮುಖಂಡರ ಜೊತೆ ಸಭೆ ನಡೆಯಿತು.
ಸುದೀರ್ಘ ಚರ್ಚೆಯ ನಂತರ,ಪ್ರಮುಖ 14 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಮ್ಮತಿಸಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರವನ್ನು ಹಿಂಪಡೆಯಲಾಗಿದೆ.
ಒಪ್ಪಿಕೊಂಡಿರುವ 13 ಬೇಡಿಕೆಗಳನ್ನು ನಿಗದಿತ ಕಾಲಮಿತಿಯೊಳಗೆ ಜಾರಿಗೊಳಿಸುವುದಾಗಿ ಸರ್ಕಾರ ಭರವಸೆ ನೀಡಿದೆ.
ತಾಂತ್ರಿಕ ಹುದ್ದೆ ಸೃಜನೆ: ಆರೋಗ್ಯ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಯನ್ನು ತಾಂತ್ರಿಕ ಅಧಿಕಾರಿಗಳಿಗೆ ನೀಡುವ ಪ್ರಮುಖ ಬೇಡಿಕೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಸೇವೆ ಮತ್ತು ಸೌಲಭ್ಯ: ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಬಡ್ತಿ ಹಾಗೂ ಆಸ್ಪತ್ರೆಗಳಿಗೆ ಸಮರ್ಪಕ ಔಷಧ ಪೂರೈಕೆ ಮಾಡುವ ಕುರಿತು ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ.
ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿರುವ ಕೆ.ಜಿ.ಎಂ.ಒ.ಎ ಕೇಂದ್ರ ಸಮಿತಿಯು, ಒಂದು ವೇಳೆ ಭರವಸೆಗಳು ಸಕಾಲದಲ್ಲಿ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಪುನರಾರಂಭಿಸುವುದಾಗಿ ತಿಳಿಸಿದೆ. ಎಲ್ಲಾ ವೈದ್ಯಾಧಿಕಾರಿಗಳು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ.
ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡಲು ನಿರ್ಧಾರ



































