ಆಲೆಟ್ಟಿ, ಸೆ. 15: ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆಯ ವಿರುದ್ಧ ಆಲೆಟ್ಟಿ ಗ್ರಾಮದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಪ್ರತಿಭಟನೆ ನಡೆಯಿತು.
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಶ್ಚಿಮ ಘಟ್ಟಗಳ ಗಡಿಯನ್ನು ಸ್ಪಷ್ಟವಾಗಿ ಗುರುತಿಸಿ, ಕೃಷಿಭೂಮಿ ಹಾಗೂ ಜನವಸತಿ ಪ್ರದೇಶಗಳಿಗೆ ಅನಗತ್ಯ ನಿರ್ಬಂಧಗಳು ಬಾರದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ರೈತರು ಮತ್ತು ಸ್ಥಳೀಯರ ಬದುಕಿನ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ಪರಿಗಣಿಸಿ, ಸ್ಥಳೀಯ ಜನರ ಅಭಿಪ್ರಾಯಕ್ಕೆ ಆದ್ಯತೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯ ಬಳಿಕ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಆಕ್ಷೇಪಣಾ ಪತ್ರ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ತೀರ್ಥರಾಮ ನೆಡ್ಚಿಲು ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊರಗಪ್ಪ ಮಾಸ್ಟರ್ ಕಣಕ್ಕೂರು ಹಾಗೂ ಜಯಪ್ರಕಾಶ್ ಕುಂಚಡ್ಕ, ಆಲೆಟ್ಟಿ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.
ವೇದಿಕೆಯ ಪ್ರಮುಖರಾದ ಅವಿನಾಶ್ ಕುರುಂಜಿ, ಬಾನುಪ್ರಕಾಶ್ ಹಾಗೂ ಮಿಲನ್ ಬಾಳಿಕಳ ಸೇರಿದಂತೆ ಆಲೆಟ್ಟಿ ಗ್ರಾಮದ ರೈತರು, ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

























