ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ವತಿಯಿಂದ ಆರಂಭಿಸಲಾದ ಖೇತ್ ಬಚಾವೋ (ಕೃಷಿ ಉಳಿಸಿ) ಅಭಿಯಾನವನ್ನು ಬೆಂಗಳೂರಿನ ಐಸಿಎಆರ್-ಆಟಾರಿ ನಿರ್ದೇಶನದಂತೆ ಮಂಗಳೂರಿನ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೃಷಿ ಇಲಾಖೆಯ ಸಹಯೋಗದೊದಿಗೆ ಜೂ-1 ರಿಂದ ಜೂನ್ 30ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರಾದ ಡಾ. ಟಿ.ಜೆ.ರಮೇಶ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಖೇತ್ ರೈತರಲ್ಲಿ ಮಣ್ಣಿನ ಆರೋಗ್ಯದ ಮಹತ್ವದ ಕುರಿತು ಅರಿವು ಮೂಡಿಸುವುದು, ಮಣ್ಣಿನ ಪರೀಕ್ಷೆ ಆಧಾರಿತ ಸಮತೋಲಿತ ರಸಗೊಬ್ಬರ ಬಳಕೆಯನ್ನು ಉತ್ತೇಜಿಸುವುದು ಹಾಗೂ ರಾಸಾಯನಿಕ ಗೊಬ್ಬರಗಳ ಅಸಮತೋಲಿತ ಬಳಕೆಯನ್ನು ತಗ್ಗಿಸುವುದು. ಜತೆಗೆ ಸಮಗ್ರ ಪೋಷಕಾಂಶ ನಿರ್ವಹಣೆ, ಹಸಿರು ಗೊಬ್ಬರ, ಸಾವಯವ ಹಾಗೂ ಜೈವಿಕ ಗೊಬ್ಬರಗಳ ಬಳಕೆ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಅಳವಡಿಕೆಗೆ ಉತ್ತೇಜನ ನೀಡುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದರ ಜತೆಗೆ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಉತ್ಪಾದನಾ ವೆಚ್ಚ ಕಡಿತ ಹಾಗೂ ಕೃಷಿಯ ಸುಸ್ಥಿರತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ದೇಶಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಅಭಿಯಾನದ ಅಂಗವಾಗಿ ಮುಂದಿನ 30ದಿನಗಳ ಕಾಲ ಕೃಷಿ ಇಲಾಖೆಯ ಸಹಯೋಗದಲ್ಲಿ ಬಂಟ್ವಾಳ, ಮುಲ್ಕಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಉಳ್ಳಾಲ, ಕಡಬ, ಮೂಡುಬಿದ್ರೆ, ಮಂಗಳೂರು ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ರೈತರೊಂದಿಗೆ ನೇರ ಸಂವಾದ ಪ್ರಾತ್ಯಕ್ಷಿಕೆಗಳು ಹಾಗೂ ತಾಂತ್ರಿಕ ಸಲಹಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಣ್ಣಿನ ಆರೋಗ್ಯ ಸಂರಕ್ಷಣೆ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

























































