ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಚೇತನ್ರನ್ನು 11 ದಿನಗಳ ಆಸ್ಪತ್ರೆ ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಜುಲೈ 16ರಂದು ಕಕ್ಯಪದವು ನಿವಾಸಿ ಲಾವಣ್ಯ ಅವರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ತಲವಾರಿನಿಂದ ಕಡಿದು ಹತ್ಯೆಗೈದಿದ್ದ. ಈ ಘಟನೆಯ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ಘಟನೆ ನಡೆದ ಬಳಿಕ ಚೇತನ್ ಕಾರಿನಲ್ಲಿ ಪರಾರಿಯಾಗಿದ್ದ. ಮರುದಿವಸ ಮಂಗಳೂರಿನಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದರು. ಬಂಧನದ ವೇಳೆ ಆತ ಇಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದರಿಂದ, ಮೊದಲಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.
ವೈದ್ಯರ ಸಲಹೆಯಂತೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆರಂಭದಲ್ಲಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್, ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು.
ಇದೀಗ ಚೇತನ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಲಾವಣ್ಯ ಕೊಲೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಧೀಶರು





































































