ಕಸ್ತೂರಿರಂಗನ್ ಅಂತಿಮ ವರದಿಯ ಕರಡು ಪ್ರತಿಗೆ ಒಕ್ಕೊರಲಿನಿಂದ ಆಕ್ಷೇಪಣೆ ಸಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳ ಬಾಧಿತ ಪ್ರದೇಶಗಳ ರೈತರು ಹಾಗೂ ಗ್ರಾಮಸ್ಥರ ಜಿಲ್ಲಾ ಮಟ್ಟದ ಸಭೆ ಗುರುವಾರ ಸುಬ್ರಹ್ಮಣ್ಯದಲ್ಲಿ ನಡೆಯಿತು. ಬೆಳ್ತಂಗಡಿ, ಕಡಬ, ಪುತ್ತೂರು ಹಾಗೂ ಸುಳ್ಯ ತಾಲೂಕುಗಳ ಕಸ್ತೂರಿರಂಗನ್ ವರದಿಯಿಂದ ಬಾಧಿತವಾಗಬಹುದಾದ ಪ್ರದೇಶಗಳ ಗ್ರಾಮಮಟ್ಟದ ಪ್ರಮುಖರು ಹಾಗೂ ರೈತರು ಸಭೆಯಲ್ಲಿ ಭಾಗವಹಿಸಿ, ವರದಿಯಿಂದ ಮಲೆನಾಡು ಮತ್ತು ಪಶ್ಚಿಮ ಘಟ್ಟದ ಜನವಸತಿ ಪ್ರದೇಶಗಳಿಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯದಂತೆ, ಕಸ್ತೂರಿರಂಗನ್ ವರದಿಯ ವಿರುದ್ದ ಬಾಧಿತ ಗ್ರಾಮಗಳ ಗ್ರಾಮ ಪಂಚಾಯಿತಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಿ, ಗ್ರಾಮಸ್ಥರನ್ನು ಒಗ್ಗೂಡಿಸುವುದರ ಜೊತೆಗೆ ವಿಶೇಷ ಸಭೆಗಳನ್ನು ನಡೆಸಲು ನಿರ್ಧರಿಸಲಾಯಿತು. ಅಲ್ಲದೆ, ಕಸ್ತೂರಿರಂಗನ್ ವರದಿಯಿಂದ ರೈತರು ಹಾಗೂ ಜನಸಾಮಾನ್ಯರಿಗೆ ಎದುರಾಗಬಹುದಾದ ಮೂಲಭೂತ ಸಮಸ್ಯೆಗಳನ್ನು ವಿವರಿಸಿ, ಪ್ರಧಾನಮಂತ್ರಿ, ರಾಜ್ಯಪಾಲರು ಹಾಗೂ ಸಂಬಂಧಪಟ್ಟ ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳ ಗಮನಕ್ಕೆ ಪತ್ರದ ಮೂಲಕ ತರುವುದಾಗಿ ವೇದಿಕೆ ತಿಳಿಸಿ
ವೇದಿಕೆ ಸಲ್ಲಿಸಿರುವ ಮನವಿಯಲ್ಲಿನ ಬೇಡಿಕೆಗಳಿಗೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಸ್ಪಂದಿಸದಿದ್ದರೆ ಹೋರಾಟವನ್ನು ಹಂತ ಹಂತವಾಗಿ ತೀವ್ರಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ ಗ್ರಾಮ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು. ಬಳಿಕ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಿ, ತಾಲೂಕು ಕಚೇರಿಗಳ ಎದುರು ಸರ್ಕಾರದ ಗಮನ ಸೆಳೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ನಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ವೇದಿಕೆ ತಿಳಿಸಿದೆ.
ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಯಾವುದೇ ರೀತಿಯಲ್ಲಿ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದರೆ, ಮುಂದಿನ ಹಂತದಲ್ಲಿ ಗುಂಡ್ಯದಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಸಲಾಗುವುದು. ಅಗತ್ಯವಿದ್ದರೆ ಜೈಲ್ ಭರೋ ಹೋರಾಟ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಎಚ್ಚರಿಕೆ ನೀಡಿದರು. ಕಸ್ತೂರಿರಂಗನ್ ವರದಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಲೆನಾಡು ಹಾಗೂ ಪಶ್ಚಿಮ ಘಟ್ಟದ ಜನವಸತಿ ಪ್ರದೇಶಗಳ ರೈತರು ಮತ್ತು ಗ್ರಾಮಸ್ಥರ ಹಿತಾಸಕ್ತಿಯನ್ನು ಪರಿಗಣಿಸಬೇಕು. ಸ್ಥಳೀಯ ಜನಜೀವನ, ಕೃಷಿ ಹಾಗೂ ಮೂಲಭೂತ ಸೌಲಭ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸರ್ಕಾರ ಸೂ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟಿಸಲು ಅಗತ್ಯ ಬಿದ್ದರೆ ಜೈಲ್ ಭರೋ ಹೋರಾಟ ನಡೆಸಲು ನಾವು ರೆಡಿ : ಕಿಶೋರ್ ಶಿರಾಡಿ ಎಚ್ಚರಿಕೆ
















