ಸುಳ್ಯ: ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಹೊಸ ತಲೆಮಾರಿಗೆ ತಿಳಿಸಿದಾಗ ಮಾತ್ರ ಅದು ಉಳಿಯಲು ಸಾಧ್ಯ. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸುವ ಕೆಲಸವನ್ನು ಅಕಾಡೆಮಿ ವತಿಯಿಂದ ನಿರಂತರವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ, ಸುಳ್ಯ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಸುಳ್ಯ ಇವರ ಸಹಯೋಗದಲ್ಲಿ ಶ್ರೀ ಶಾರದಾ ಕಾಲೇಜಿನಲ್ಲಿ ಆ.29ರಂದು ನಡೆದ ಡಾ. ಕೋಡಿ ಕುಶಾಲಪ್ಪ ಗೌಡರ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಅರೆಭಾಷೆಯವರ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅಕಾಡೆಮಿ ಮಾಡುತ್ತಿರುವ ಕಾರ್ಯ ಶ್ರೇಷ್ಠವಾದುದು ಎಂದು ಹೇಳಿದರು.
ನಿವೃತ್ತ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ ಹಾಗೂ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸ್ವರ್ಣಕಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಸಾಹಿತಿ ಸಂಜೀವ ಕುದ್ಪಾಜೆ ಅವರು ‘ಗುರುಗಳ ನೆಂಪು’ ವಿಷಯದ ಕುರಿತು ಹಾಗೂ ನಿವೃತ್ತ ಕನ್ನಡ ಉಪನ್ಯಾಸಕ ಎನ್.ವಿ. ಕರುಣಾಕರ ಅವರು ‘ಅರೆಭಾಷೆಗೆ ಕೋಡಿ ಕುಶಾಲಪ್ಪ ಗೌಡರ ಕೊಡುಗೆ’ ವಿಷಯದ ಕುರಿತು ಉಪನ್ಯಾಸ ನೀಡಿದರು.
ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲ್ ಹಾಗೂ ಜ್ಞಾನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಕಾಡೆಮಿ ಸದಸ್ಯ ಸಂಚಾಲಕ ಗೋಪಾಲ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅಕಾಡೆಮಿ ಸದಸ್ಯೆ ಚಂದ್ರಾವತಿ ಬಡ್ಡಡ್ಕ ವಂದಿಸಿದರು. ಪೂಜಾ ವಿತೇಶ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಹೊಸ ತಲೆಮಾರಿಗೆ ತಿಳಿಸಿದಾಗ ಮಾತ್ರ ಅದು ಉಳಿಯಲು ಸಾಧ್ಯ: ಸದಾನಂದ ಮಾವಜಿ



















