ಸುಳ್ಯ, ಸೆ.20: ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಜಾಲ್ಸೂರು ಗ್ರಾಮದ ವಿನೋಭಾನಗರದಲ್ಲಿ ಸೆ.19ರಂದು ನಡೆದಿದೆ.
ಮೃತರನ್ನು ಪುತ್ತೂರು ತಾಲೂಕಿನ ಕೋಡಿಪ್ಪಾಡಿ ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ.
ಬಂಟ್ವಾಳ ತಾಲೂಕಿನ ಕೆದಿಲ ನಿವಾಸಿ ಅಬ್ದುಲ್ ಲತೀಫ್ ಅವರು ಚಲಾಯಿಸುತ್ತಿದ್ದ ಲಾರಿ ದೀಪಕ್ ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಿಂದ ಇಳಿದು ದೀಪಕ್ ಅವರು ರಸ್ತೆ ದಾಟುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ದೀಪಕ್ ಅವರ ಮೇಲೆ ಲಾರಿ ಹರಿದ ಪರಿಣಾಮ ತಲೆಯ ಮೇಲ್ಭಾಗ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪಾದಚಾರಿ ದೀಪಕ್ ಮೃತ್ಯು

























